← Back to home
ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು
Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ॐ
ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು
ಪದುಮನಾಭನ ಪಾದದೊಲುಮೆ ಎನಗಾಯಿತು
ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತು
ಹರಿಯ ನಾಮಾಮೃತ ಕಿವಿಗೊದಗಿತು
ಹರಿಯ ದಾಸರು ಎನ್ನ ಬಂಧು ಬಳಗವಾದರು
ಹರಿಯ ಶ್ರೀಮುದ್ರೆ ಆಭರಣವಾಯ್ತು ||1||
ಮುಕುತರಾದರು ಎನ್ನ ನೂರೊಂದು ಕುಲದವರು
ಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊ
ಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದು
ರುಕುಮಿಣಿಯರಸ ಕೈವಶನಾದನೆನಗೆ ||2||
ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತು
ಮುಂದೆನ್ನ ಜನ್ಮ ಸಫಲವಾಯಿತು
ತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯ
ಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ ||3||
Thoughts & Reflections
0No reflections shared yet. Be the first to share your thoughts!